ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್

ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ , 2018 ರ ರಾಜ್ಯ ವಿಧಾನಸಭಾ ಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಿದರು.
ಒಂದೇ ಹಂತದಲ್ಲಿ ನಡೆಯುವ ಚುನಾವಣೆ ಮೇ 12, ಶನಿವಾರದಂದು ನಡೆಯಲಿದೆ. ಮೇ 18, ಶುಕ್ರವಾರ ಮತ ಎಣಿಕೆ ನಡೆಯಲಿದೆ. ಇಲ್ಲಿನ ಚುನಾವಣಾ ಆಯೋಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಯುಕ್ತ ಓಂ ಪ್ರಕಾಶ್ ರಾವತ್ ದಿನ ಘೋಷಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು, ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಎಂದು ಹೇಳಿದರು.
ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ರಾಜ್ಯದಲ್ಲಿ ಬಿರುಸಿನಿಂದ ಸಾಗುತ್ತಿದ್ದು, ರಾಷ್ಟ್ರ ನಾಯಕರೂ ರಾಜ್ಯದಲ್ಲಿಯೇ ಬೀಡು ಬಿಟ್ಟಿದ್ದಾರೆ. ದಿನಾಂಕ ನಿಗದಿಯಾದ್ದರಿಂದ ಈ ಚಟುವಟಿಕೆಗಳು ಮತ್ತಷ್ಟು ಬಿರುಸುಗೊಳ್ಳಲ್ಲಿದೆ. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಬಿರುಸಿನ ಹೋರಾಟ ನಡೆಯಲಿದ್ದು, ಇನ್ನೂ ಕೆಲವು ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಕ್ಷಗಳು ಘೋಷಿಸುವುದು ಬಾಕಿ ಇದೆ. ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಮೇ 28ಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿ ಮುಕ್ತಾಯವಾಗಲಿದೆ.
Comments