ಗುಜರಾತ್ ಚುನಾವಣಾ ಫಲಿತಾಂಶ ಕುರಿತು ಎಚ್ ಡಿಕೆ ಹೇಳಿದ್ದೇನು
ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ನಿರಾಶೆ ತಂದಿದೆ. ಆದರೆ ಕರ್ನಾಟಕದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಎಚ್ ಡಿಕೆ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರನ್ನು ಒಲಿಸಿಕೊಳ್ಳಲು 75 ದಿನ ನಿರಂತರ ಹರಸಾಹಸ ಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದವರು ಹಲವು ಸಮುದಾಯದವರ ಮುಖಾಂತರ ಚುನಾವಣಾ ಪ್ರಚಾರ ಮಾಡಿದರು. ಕಾಂಗ್ರೆಸ್ ಮೂಲ ಮತದಾರರನ್ನು ತಮ್ಮತ್ತ ಸೆಳೆಯಲು ವಿಫಲವಾಗಿದೆ. ಗುಜರಾತ್ ನಲ್ಲಿ ಬೇರೆ ಪಕ್ಷ ಇದ್ದಿದ್ದರೆ ಎರಡೂ ರಾಷ್ಟ್ರೀಯ ಪಕ್ಷಗಳು ನೆಲ ಕಚ್ಚುತ್ತಿದ್ದವು. ಆರು ಲಕ್ಷ ನೋಟಾ ಮತದಾನ ಆಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ರಾಜ್ಯದಲ್ಲಿ ತಮ್ಮದೆ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇನ್ನು ಬಿಜೆಪಿಯವರು ವೈಯಕ್ತಿಕವಾಗಿ ಹೇಳಿಕೆಗಳನ್ನು ಕೊಡುತ್ತ ಪರಿವರ್ತನಾ ಯಾತ್ರೆ ಮಾಡುತ್ತಿದ್ದಾರೆ ಎಂದರು.ರಾಜ್ಯ ಸರ್ಕಾರ ನೀರಾವರಿ ಯೋಜನೆಗೆ ಎಂಟು ಸಾವಿರ ಸಾವಿರ ಕೋಟಿ ರುಪಾಯಿ ಖರ್ಚು ಮಾಡಿದೆ ಎನ್ನುತ್ತಿದ್ದಾರೆ. ನಾಲೆಗಳಿಗೆ ನಾಲ್ಕು ಸಾವಿರ ಕೋಟಿ, ತುಂಗಭದ್ರಾ 1.7 ಸಾವಿರ ಕೋಟಿ ಹಣ ಖರ್ಚು ಮಾಡಿದ್ದಾರೆ. ಇದರಲ್ಲಿ ಅವರ ಜೇಬಿಗೆ ಎಷ್ಟು ಬಂದಿದೆ. ಇನ್ನು ಬಿಜೆಪಿಯವರು ಏನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಮೂರನೇ ಶಕ್ತಿಯಾಗಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎನ್ನುವ ನಂಬಿಕ ಇದೆ ಎಂದಿದ್ದಾರೆ.
Comments